ಬೆಳಗಾಯಿತು ವಾರ್ತೆ
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಕಟ್ಟ ಕಡೆಯ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ಸೇವೆ ಮಾಡುವುದೇ ಮುಖ್ಯ ಧ್ಯೇಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಹೇಳಿದರು.
ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ವಿಠಲಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಇದೇ ವಿಠಲಾಪುರ ಗ್ರಾಮದಿಂದ. ನನ್ನನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದು ಇದೇ ಸಂಡೂರು ಜನತೆ. 2004 ರಲ್ಲಿ ಈ ಭಾಗದಲ್ಲಿ ವಿದ್ಯುತ್ ಕಂಬದಲ್ಲಿ 40 ವಾಟ್ ಬಲ್ಬ್ ನಿಂದ ಬೆಳಕು ಸಹ ನೆಲಕಚ್ಚುತ್ತಿರಲಿಲ್ಲ, ಅಷ್ಟೊಂದು ವಿದ್ಯುತ್ ಸಮಸ್ಯೆ ಇತ್ತು. ವಿಠಲಾಪುರ ಗ್ರಾಮದಲ್ಲಿಯೇ ವಿದ್ಯುತ್ ಉಪಕೇಂದ್ರ ಸ್ಥಾಪಿಸುವ ಮೂಲಕ ಗ್ರಾಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ಮಾಡಲಾಯಿತು ಎಂದು ಸ್ಮರಿಸಿದ ಅವರು, ಹಂತ-ಹಂತವಾಗಿ ಅಭಿವೃದ್ಧಿಪಡಿಸುವ ಮೂಲಕ ಜಿಲ್ಲೆಯಲ್ಲಿ ಮಾದರಿ ತಾಲ್ಲೂಕನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್ ,ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ನೂರುದ್ದೀನ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್.ಸ್ವಾಮಿ., ತೋರಣಗಲ್ಲು ವಾಡಾ ಅಧ್ಯಕ್ಷ ಅಕ್ಷಯ್ ಅಶೋಕ್ ಲಾಡ್ ಉಪಸ್ಥಿತರಿದ್ದರು.





