ಬೆಳಗಾಯಿತು ವಾರ್ತೆ
ಬಳ್ಳಾರಿ:ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್ಐಆರ್-2026) ಮತ್ತು ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಹಾಗೂ ಮತದಾರರ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾನುವಾರ ಬೆಳಿಗ್ಗೆ ನಗರದ ಎನ್ಸಿಸಿ ಮೈದಾನದಲ್ಲಿ 4 ಕಿಲೋಮೀಟರ್ ಮ್ಯಾರಥಾನ್ ಓಟವನ್ನು ಆಯೋಜಿಸಲಾಯಿತು.
ಮ್ಯಾರಥಾನ್ಗೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮಹಮ್ಮದ್ ಹ್ಯಾರಿಸ್ ಸುಮೇರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಮ್ಯಾರಥಾನ್ ಓಟವು ಎನ್ಸಿಸಿ ಮೈದಾನದಿಂದ ಆರಂಭವಾಗಿ ಸುಧಾ ಕ್ರಾಸ್, ಇನ್ಫೆಂಟ್ರಿ ರಸ್ತೆ, ಎಸ್ಪಿ ವೃತ್ತ ಮಾರ್ಗವಾಗಿ ಸಾಗಿದ್ದು, ದುರ್ಗಮ್ಮ ದೇವಸ್ಥಾನದ ಬಳಿ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಯುವಜನರು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮತದಾರರ ಜಾಗೃತಿ ಸಂದೇಶವನ್ನು ಸಾರಿದರು.





