ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ 34ನೇ ವಾರ್ಡಿನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನ ಸಮೀಪ 2.90 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.
ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ರಾಜೇಶ್ವರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ. ನಾಗೇಂದ್ರ ಅವರ ಸಹೋದರ, ಕಾಂಗ್ರೆಸ್ ಮುಖಂಡ ಬಿ. ವೆಂಕಟೇಶ್ ಪ್ರಸಾದ್ ಭಾಗವಹಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಯೋಜನೆಯಡಿ ರಸ್ತೆ ಡಾಂಬರೀಕರಣ, ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಕಾಮಗಾರಿಗಳಿಂದ ತಿಲಕ್ ನಗರದ ನಿವಾಸಿಗಳಿಗೆ ಉತ್ತಮ ಗುಣಮಟ್ಟದ ರಸ್ತೆ, ಸುಸಜ್ಜಿತ ಒಳಚರಂಡಿ ವ್ಯವಸ್ಥೆ, ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಹಾಗೂ ಸುರಕ್ಷಿತ ಪಾದಚಾರಿ ಮಾರ್ಗ ಲಭ್ಯವಾಗಲಿದ್ದು, ವಾರ್ಡಿನ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಲಾಯರ್ ಜನಾರ್ದನ, ಮಂಜುನಾಥ್, ಜಂಬಣ್ಣ, ರವಿಕುಮಾರ್, ಶಮೀಮ್, ಶಾಸ್ತ್ರಿ, ಶ್ರೀನಾಥ್ ರೆಡ್ಡಿ, ಬಿ.ಎ. ಮಲ್ಲೇಶ್ವರಿ, ಯೋಗಾನಂದ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




