ಬೆಳಗಾಯಿತು ವಾರ್ತೆ
ಬಳ್ಳಾರಿ: ಕೊಟ್ಟೂರು ಉಜೈನ್ ಗುರುಪೀಠದ ಕಾರ್ಯದರ್ಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಹಿರಿಯ ರಾಜಕೀಯ ಮುಖಂಡ ಎಂ.ಎಂ.ಜೆ. ಹರ್ಷವರ್ಧನ್ ಅವರ ನಿಧನಕ್ಕೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬುಧವಾರ ಹರ್ಷವರ್ಧನ್ ಅವರ ನಿಧನದ ಸುದ್ದಿ ತಿಳಿದ ಕೂಡಲೇ ಕಂಬನಿ ಮಿಡಿದ ಶಾಸಕ ಬಿ. ನಾಗೇಂದ್ರ, ಅವರ ಅಗಲಿಕೆ ಕೊಟ್ಟೂರು ಭಾಗಕ್ಕೆ ಹಾಗೂ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಹರ್ಷವರ್ಧನ್ ಅವರು ಈ ಹಿಂದೆ ಕೊಟ್ಟೂರು ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರ ವಿಶ್ವಾಸ ಗಳಿಸಿದ್ದ ಅವರು, ಉಜೈನ್ ಗುರುಪೀಠದ ಕಾರ್ಯದರ್ಶಿಯಾಗಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು. ಸ್ಥಳೀಯ ಮಟ್ಟದ ವಿವಿಧ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಅಪಾರ ಶ್ರಮವಹಿಸಿ, ಜನಸಂಪರ್ಕದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಸ್ಮರಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕುಟುಂಬದವರಿಗೆ ಹಾಗೂ ಬಂಧು-ಬಳಗಕ್ಕೆ ನೀಡಲಿ ಎಂದು ಶಾಸಕ ಬಿ. ನಾಗೇಂದ್ರ ಪ್ರಾರ್ಥಿಸಿದ್ದಾರೆ.





