ಬೆಳಗಾಯಿತು ವಾರ್ತೆ
ಬಳ್ಳಾರಿ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದರು. ಬಳ್ಳಾರಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಹಣ ದುರುಪಯೋಗ, ಬಡ ಮಕ್ಕಳ ಶಿಕ್ಷಣ ಹಾಗೂ ವಿದ್ಯಾರ್ಥಿವೇತನದ ಹಣದ ಕುರಿತು ನಾಗೇಂದ್ರ ಅವರು ಸ್ಪಷ್ಟನೆ ನೀಡಬೇಕು ಎಂದರು.
ಭ್ರಷ್ಟಾಚಾರಕ್ಕೆ ಯಾವುದೇ ಸಮುದಾಯದ ಹೆಸರನ್ನು ಬಳಸಬಾರದು. ದಲಿತ ಸಮುದಾಯದ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು. ಬಳ್ಳಾರಿ ಚಂದ್ರಶೇಖರ್ ಕೊಲೆ ಪ್ರಕರಣದ ಬಗ್ಗೆಯೂ ನಾಗೇಂದ್ರ ಸ್ಪಷ್ಟನೆ ನೀಡಬೇಕು. ನಾಗೇಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು. ಒಬ್ಬರಿಗೆ ಅನ್ವಯಿಸುವ ಮಾನದಂಡ ಎಲ್ಲರಿಗೂ ಅನ್ವಯವಾಗಬೇಕು ಎಂದು ಒತ್ತಾಯಿಸಿದರು.
“ವಿಮಾನ ವೇಗದಲ್ಲಿದ್ದ ಕಾಂಗ್ರೆಸ್ ಇಂದು ಎತ್ತಿನಬಂಡಿ ವೇಗಕ್ಕೆ ಇಳಿದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಿದೆ” ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.





