ಬಳ್ಳಾರಿ: ರಾಜ್ಯದಲ್ಲಿ ನಡೆದಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ನಗರದ ವಾಜಪೇಯಿ ಲೇಔಟ್ನ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಸುಮಾರು 187 ಕೋಟಿ ಮೊತ್ತದ ಹಗರಣ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಹಗರಣದ ಹಿಂದೆ ಇರುವ ಎಲ್ಲ ಅಂಶಗಳನ್ನು ತನಿಖೆ ಮೂಲಕ ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯ ಲೋಪವಾಗಬಾರದು ಎಂದು ಅವರು ಆಗ್ರಹಿಸಿದರು.
ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಪಾಲಣ್ಣ, ಡಾ. ಬಿ.ಕೆ. ಸುಂದರ, ಹನುಮಂತಪ್ಪ, ಪುಷ್ಪ ಚಂದ್ರಶೇಖರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.





