ಬೆಳಗಾಯಿತು ವಾರ್ತೆ
ಬಳ್ಳಾರಿ: ಭೋವಿ (ವಡ್ಡರ) ಸಮಾಜಕ್ಕೆ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ರಾಜ್ಯಸಭೆ, ವಿಧಾನಪರಿಷತ್ ಹಾಗೂ ನಿಗಮ-ಮಂಡಳಿಗಳಲ್ಲೂ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಬಳ್ಳಾರಿ ಜಿಲ್ಲಾ ಭೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ರಾಮಾಂಜಿ ಹಾಗೂ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಚೌಡಯ್ಯ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಂಘ ಹಲವು ವರ್ಷಗಳಿಂದ ಶ್ರಮಿಸುತ್ತಿದೆ. ಸಮಾಜದ ಗ್ರಾಮೀಣ ಭಾಗದ ಜನರಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದರು.
ಅ.11ರಂದು ಪ್ರತಿಭಾ ಪುರಸ್ಕಾರ: ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘ ಹಾಗೂ ಬಳ್ಳಾರಿ ಜಿಲ್ಲಾ ಸಂಘದ ಆಶ್ರಯದಲ್ಲಿ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ರಾಜ್ಯಮಟ್ಟದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಸಚಿವ ಶಿವರಾಜ್ ಎಸ್. ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹15 ಸಾವಿರ, ₹10 ಸಾವಿರ ಹಾಗೂ ₹8 ಸಾವಿರ ಬಹುಮಾನ ನೀಡಲಾಗುವುದು. ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ₹25 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಮಹೇಶ್, ಪ್ರಕಾಶ್, ಎಲ್ಲಮ್ಮ, ವೆಂಕಟೇಶ್, ಹನುಮಂತರಾವ್, ಮಲ್ಲಯ್ಯ ಸೇರಿದಂತೆ ಹಲವರು ಹಾಜರಿದ್ದರು.





