ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ನಿಧನಕ್ಕೆ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಬುಧವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದೇವೇಗೌಡರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಬಳಿಕ ಕೆಲಕಾಲ ಮೌನಾಚರಣೆ ನಡೆಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೀನಳ್ಳಿ ತಾಯಣ್ಣ, ಚನ್ನಮ್ಮ ಅವರ ಅಗಲಿಕೆ ಜೆಡಿಎಸ್ ಕುಟುಂಬಕ್ಕೆ ಅಪಾರ ದುಃಖವನ್ನುಂಟು ಮಾಡಿದೆ. ಪ್ರಧಾನಮಂತ್ರಿಯವರ ಪತ್ನಿಯಾಗಿದ್ದರೂ ಯಾವುದೇ ಅಹಂಕಾರವಿಲ್ಲದೆ ಮನೆಗೆ ಬಂದ ಪ್ರತಿಯೊಬ್ಬರನ್ನೂ ತಾಯಿಯ ಮಮತೆಯಿಂದ ಸ್ವಾಗತಿಸಿ ಗೌರವಿಸುತ್ತಿದ್ದರು. ಅವರ ಸರಳತೆ, ಕರುಣೆ ಮತ್ತು ಮಾನವೀಯ ಗುಣಗಳು ಸದಾ ಸ್ಮರಣೀಯವಾಗಿರಲಿವೆ ಎಂದು ಹೇಳಿದರು.
ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ) ಮಾತನಾಡಿ, ಚನ್ನಮ್ಮ ಅವರು ಎಲ್ಲರನ್ನು ಪ್ರೀತಿ ಮತ್ತು ಆತ್ಮೀಯತೆಯಿಂದ ಕಾಣುತ್ತಿದ್ದ ಆದರ್ಶ ಗೃಹಿಣಿಯಾಗಿದ್ದರು. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ರೆಡ್ಡಿ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅದ್ದಿಗೇರಿ ರಾಮಣ್ಣ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ವಸಂತ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾ, ಕಂಪ್ಲಿ ತಾಲೂಕು ಅಧ್ಯಕ್ಷ ಮೇಘರಾಜ, ಸಂಡೂರು ತಾಲೂಕು ಅಧ್ಯಕ್ಷ ಹೊಸಗೆರಪ್ಪ, ಸಿರುಗುಪ್ಪ ತಾಲೂಕು ಅಧ್ಯಕ್ಷ ಶಿವನಾರಾಯಣ, ಚಾಗನೂರು ನಾಗರಾಜ್, ಅಶೋಕ್ ಸಂಗನಾಳ್, ವೀರೇಶ್, ಭಾಷಾ, ಭಾವಿ ಶಿವಕುಮಾರ್, ವನ್ನೂರು ಅಲಿ, ವಿಜಯ, ಲಕ್ಷ್ಮೀ, ರಾಜೇಶ್ವರಿ, ಸ್ವಾತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.





