ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಕಳೆದ ಎರಡು ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 15 ಲಕ್ಷ ರೂ.ಮೌಲ್ಯದ ಮೆಣಸಿನಕಾಯಿಯನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ನಿಯಮಗಳ ಪ್ರಕಾರ, ಕೃಷಿ ಉತ್ಪನ್ನಗಳು ಮತ್ತು ಇತರ ವಸ್ತುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವವರು ಸರಿಯಾದ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದೆ.
ಕಳೆದ ತಿಂಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧಿಕಾರಿಗಳು ರೈತರೊಂದಿಗೆ ವಿಶೇಷವಾಗಿ ಮೆಣಸಿನಕಾಯಿ ಬೆಳೆಗಾರರ ಜೊತೆ ಸಭೆ ನಡೆಸಿ, ತಮ್ಮ ಉತ್ಪನ್ನಗಳನ್ನು ಸಾಗಿಸುವಾಗ ಇ-ವೇ ಬಿಲ್ಗಳನ್ನು ತರುವಂತೆ ಸೂಚನೆ ನೀಡಿದ್ದರು.
ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 15 ಲಕ್ಷ ಮೌಲ್ಯದ 11 ಕ್ವಿಂಟಾಲ್ ಮೆಣಸಿನಕಾಯಿಯನ್ನು ವಶಕ್ಕೆ ಪಡೆಯಲಾಗಿದೆ. ರೈತರು ಮತ್ತು ಸಾಗಣೆದಾರರು ದಾಖಲೆಗಳ ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ಮೆಣಸಿನಕಾಯಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.