ಬೆಳಗಾಯಿತು ವಾರ್ತೆ
ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ಬಳ್ಳಾರಿ ನಗರ ಮಂಡಲದ ವತಿಯಿಂದ ನಗರದ ತಾಳೂರು ರಸ್ತೆಯ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಶಿಬಿರದಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಸೇವೆಗೆ ಕೈಜೋಡಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕರು, ‘ರಕ್ತದಾನವು ಮಹಾದಾನವಾಗಿದೆ, ನಮ್ಮ ಒಂದು ಸಣ್ಣ ಪ್ರಯತ್ನವು ಅಗತ್ಯವಿರುವ ಮತ್ತೊಬ್ಬರ ಜೀವ ಉಳಿಸಲು ನೆರವಾಗಬಹುದು. ಈ ಸದುದ್ದೇಶದಿಂದ ಸೇವಾ ಕಾರ್ಯದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ. ರಕ್ತದಾನದ ಮೂಲಕ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾಗುವ ಜೊತೆಗೆ, ಸಮಾಜದಲ್ಲಿ ಮಾನವೀಯತೆ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು.





