ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಪ್ರಧಾನಮಂತ್ರಿ ನರೆಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ನಗರದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದೆ.
ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮಾಜಿ ಶಾಸಕ ಅವರ ನೇತೃತ್ವದಲ್ಲಿ ಕುಮಾರಸ್ವಾಮಿ ದೇವಸ್ಥಾನ ಹತ್ತಿರದಿಂದ ಕಾಂಗ್ರೆಸ್ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಆದರೆ, ಮೆರವಣಿಗೆ ಕಾಂಗ್ರೆಸ್ ಕಚೇರಿಗೆ ತಲುಪುವ ಮುನ್ನವೇ ಪೊಲೀಸರು ಮಧ್ಯದಲ್ಲೇ ತಡೆದು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಒಂದಷ್ಟು ವಾಗ್ವಾದವೂ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರು.
ಈ ವೇಳೆ ಮಾತನಾಡಿದ ಸೋಮಶೇಖರ್ ರೆಡ್ಡಿ, “ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆಯುವುದು ಅತ್ಯಂತ ಖಂಡನೀಯ. ಖರ್ಗೆಯವರು ತಕ್ಷಣವೇ ಕ್ಷಮೆಯಾಚಿಸಬೇಕು. ಕೇವಲ ಮೋದಿಯವರಿಗೆ ಮಾತ್ರವಲ್ಲದೆ ದೇಶದ ಜನರಿಗೂ ಕ್ಷಮೆಯಾಚಿಸಬೇಕು,” ಎಂದು ಆಗ್ರಹಿಸಿದರು.
ಅವರು ಮುಂದುವರೆದು, “ಮೋದಿ ಅವರ ನಾಯಕತ್ವವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ನಾಯಕರು ಅದನ್ನು ಒಪ್ಪಿಕೊಳ್ಳದಿರುವುದು ದುರದೃಷ್ಟಕರ ಸಂಗತಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.





