ಬೆಳಗಾಯಿತು ವಾರ್ತೆ
ಬಳ್ಳಾರಿ: ಎಚ್ಐವಿ ನಿಯಂತ್ರಣ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಮಂಗಳವಾರ ಎಚ್ಐವಿ ಜಾಗೃತಿ ಮ್ಯಾರಥಾನ್ ಆಯೋಜಿಸಲಾಯಿತು. ‘ಓಟ ಆರೋಗ್ಯಕ್ಕೆ–ನಡಿಗೆ ಎಚ್ಐವಿ ನಿಯಂತ್ರಣಕ್ಕೆ’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಮ್ಯಾರಥಾನ್ನಲ್ಲಿ ನಗರದ ವಿವಿಧ ಪದವಿ, ಪದವಿ ಪೂರ್ವ ಹಾಗೂ ಡಿಪ್ಲೋಮಾ ಕಾಲೇಜುಗಳ 200ಕ್ಕೂ ಅಧಿಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎಚ್ಐವಿ ನಿಯಂತ್ರಣ ಮತ್ತು ನಿರ್ವಹಣಾ ಘಟಕ, ವಿವಿಧ ಕಾಲೇಜುಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇಂದಿರಾ ವೃತ್ತದಲ್ಲಿ ಮ್ಯಾರಥಾನ್ಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸರೆಡ್ಡಿ ಮಾತನಾಡಿ, ಮ್ಯಾರಥಾನ್ ಓಟ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿದರೆ, ನಡಿಗೆ ಮನೋಬಲ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾಜದಲ್ಲಿ ಎಚ್ಐವಿ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಡ್ಯಾಪ್ಕು, ಐಸಿಟಿಸಿ, ಮೊಬೈಲ್ ಐಸಿಟಿಸಿ, ಡಿಎಸ್ಆರ್ಸಿ, ಎಆರ್ಟಿ, ಎಸ್ಎಸ್ಕೆ ಹಾಗೂ ವಿಮುಕ್ತಿ, ಸೌಖ್ಯ, ಬೆಳಕು ಸಮುದಾಯ ಸೇವಾ ಸಂಸ್ಥೆ, ನಿತ್ಯ ಜೀವನ ಮತ್ತು ಎಫ್ಪಿಎಐ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರಕ್ತಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು





