ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಮಹಿಳಾ ಮೀಸಲಾತಿ ಬಿಲ್ ಹಾಗೂ ಸಂವಿಧಾನ ಸಂಬಂಧಿತ ವಿಚಾರಗಳಲ್ಲಿ ಎನ್ಡಿಎ ಸರ್ಕಾರದ ನಡೆ ವಿರುದ್ಧ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷವು ಸದಾ ಮಹಿಳೆಯರಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದು, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಅವಧಿಯಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡ ಉದಾಹರಣೆಗಳಿವೆ ಎಂದು ತಿಳಿಸಿದ್ದಾರೆ.
ಇದೀಗ ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ಸೋಲು ಕಾಣುತ್ತಿರುವ ಹಿನ್ನೆಲೆಯಲ್ಲಿ, ಎನ್ಡಿಎ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಮಹಿಳಾ ಬಿಲ್ ವಿಚಾರವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. 2023ರಲ್ಲಿ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಬಿಲ್ ಅವಿರೋಧವಾಗಿ ಅಂಗೀಕೃತವಾಗಿದ್ದರೂ, ಇದುವರೆಗೆ ಜಾರಿಗೆ ತರಲು ಬಿಜೆಪಿ ಮುಂದಾಗಿಲ್ಲ ಎಂದು ಹೇಳಿದ್ದಾರೆ.
ಇನ್ನೂ, ಮಹಿಳಾ ಮೀಸಲಾತಿ ಬಿಲ್ ಜೊತೆಗೆ ಕ್ಷೇತ್ರ ಮರುವಿಂಗಡಣೆ (delimitation) ಸೇರಿದಂತೆ ಇತರೆ ಪ್ರಸ್ತಾಪಗಳನ್ನು ಸೇರಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಯತ್ನಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಹೊಸ ಜನಗಣತಿ, ಜಾತಿ ಆಧಾರಿತ ಗಣತಿ ಹಾಗೂ ಒಬಿಸಿ ವರ್ಗಗಳ ಗಣತಿ ಕುರಿತಾಗಿ ಸ್ಪಷ್ಟತೆ ಇಲ್ಲದೆ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾಪಕ್ಕೂ ಸಮಗ್ರ ಅಧ್ಯಯನ ಇಲ್ಲದೆ ಮುಂದಾಗಿರುವುದು ಗಂಭೀರ ವಿಷಯ ಎಂದು ತಿಳಿಸಿದ್ದಾರೆ.





