ದೊಡ್ಡಬಳ್ಳಾಪುರ – ರಾಜ್ಯದಲ್ಲಿ ಜುಲೈ ೧೯ ಹಾಗೂ ಜುಲೈ ೨೨ ರಂದು ನಡೆಯಲಿರುವ ೨೦೨೦-೨೧ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ೮.೭೬ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ಕಳೆದ ಸಾಲಿಗಿಂತ ಈ ಬಾರಿ ಪರೀಕ್ಷಾ ಕೇಂದ್ರಗಳು ಹಾಗೂ ಕೊಠಡಿಗಳ ಸಂಖ್ಯೆಗಳನ್ನು ಹೆಚ್ಚಿಸಲಾಗಿದ್ದು,೧.೧೯ ಲಕ್ಷ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಕೊವಿಡ್ ಪಾಸಿಟಿವಿಟಿ ದರ ಶೇ.೧೩.೫ ಇತ್ತು. ಈ ಬಾರಿ ೧.೬ ರಷ್ಟು ಮಾತ್ರ ಇದೆ. ಇದು ಬರೀ ಪರೀಕ್ಷಾ ಕೇಂದ್ರವಲ್ಲ ಮಕ್ಕಳ ಸುರಕ್ಷತಾ ಕೇಂದ್ರವಾಗಿದ್ದು, ಪೋಷಕರು ಯಾವುದೇ ಆತಂಕಕ್ಕೊಳಗಾಗದೇ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸುವಂತೆ ಮನವಿ ಮಾಡಿದರು.