ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಒಡೆತನ ಯೋಜನೆ ಕಳೆದ ಎರಡು ವರ್ಷಗಳಿಂದ ಸಮರ್ಪಕವಾಗಿ ಜಾರಿಯಾಗದೆ ಇರುವುದಕ್ಕೆ ಜಿಲ್ಲಾಧಿಕಾರಿಗಳ ನಿರ್ಲಕ್ಷವೇ ಕಾರಣವಾಗಿದೆ ಎಂದು ಕರ್ನಾಟಕ ಚಲುವಾದಿ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಸಿ. ಆನಂದ ಕುಮಾರ್ ಅವರು ಆರೋಪಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಪತ್ರಿಕಾಭವನದಲ್ಲಿ ಬುಧವಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂ ಒಡೆತನ ಯೋಜನೆ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಈ ಯೋಜನೆಯ ಪ್ರಯೋಜನ ಸಿಗದೆ ವಿಳಂಬವಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಈ ಯೋಜನೆಯಡಿ ರಚಿಸಬೇಕಾದ ಭೂ ದರ ನಿಗದಿ ಸಮಿತಿಯನ್ನು ಇನ್ನೂ ರಚಿಸದಿರುವುದರಿಂದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ನಿಗಮ, ಬೋವಿ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳಡಿ ಬರುವ ಬಡ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. 2025ರ ಡಿಸೆಂಬರ್ 04ರಂದು ಸಲ್ಲಿಸಲಾದ ತಕರಾರು ಅರ್ಜಿಗಳನ್ನು ನೆಪವನ್ನಾಗಿ ಮಾಡಿಕೊಂಡು ಯೋಜನೆ ಜಾರಿಗೆ ವಿಳಂಬ ಮಾಡುತ್ತಿರುವುದು ಖಂಡನೀಯ. ಇಂತಹ ಅರ್ಜಿಗಳನ್ನು ಮುಂದಿಟ್ಟುಕೊಂಡು ಯೋಜನೆಯನ್ನು ಸ್ಥಗಿತಗೊಳಿಸಿದರೆ ತಳ ಸಮುದಾಯಗಳಿಗೆ ಮತ್ತಷ್ಟು ಅನ್ಯಾಯವಾಗು ವುದಲ್ಲದೆ, ಅವರ ಬದುಕಿನ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದರು.
ಈ ಕುರಿತಂತೆ ಮೂರು ದಿನಗಳೊಳಗೆ ಭೂ ದರ ನಿಗದಿ ಸಭೆಯನ್ನು ಕರೆದು ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಈಶ್ವರಪ್ಪ, ವಕೀಲರಾದ ಬಾಲಾಜಿ, ತುಳಿಸಿ, ಜಯಲಕ್ಷ್ಮಿ, ಜಿ. ದಿವಾಕರ್ ಬಾಬು, ವೀರೇಶ ಸೇರಿದಂತೆ ಮುಖಂಡರು ಹಾಜರಿದ್ದರು.
ಪ್ರಮುಖ ಆಗ್ರಹಗಳು:
ತಕ್ಷಣ ಭೂ ದರ ನಿಗದಿ ಸಮಿತಿ ರಚನೆ ಮಾಡಬೇಕು.
ಅರ್ಹ ಫಲಾನುಭವಿಗಳಿಗೆ ಭೂಮಿಯನ್ನು ಮಂಜೂರು ಮಾಡಬೇಕು.
ಯೋಜನೆ ಜಾರಿಗೆ ತ್ವರಿತ ಕ್ರಮ ಕೈಗೊಳ್ಳಬೇಕು.





