ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಸಾರ್ವಜನಿಕ ಹಿತದೃಷ್ಟಿಯಿಂದ ಬಳ್ಳಾರಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅವಶ್ಯಕತೆಯನ್ನು ಪೂರೈಸಲು ಏ.3ರಿಂದ ತುಂಗಭದ್ರಾ ಕಾಲುವೆಗೆ ಕುಡಿಯುವ ನೀರು ಬಿಡುಗಡೆ ಮಾಡಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ಹಾಗೂ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರ ಅಭಿಪ್ರಾಯದ ಆಧಾರದಲ್ಲಿ ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಜಿಲ್ಲೆಯಲ್ಲಿನ ಜನರು ಹಾಗೂ ಜಾನುವಾರುಗಳಿಗೆ ತೀವ್ರ ನೀರಿನ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಏ. 3 ರಿಂದ ಏ. 18ರ ವರೆಗೆ ಒಟ್ಟು 15 ದಿನಗಳ ಕಾಲ ಪ್ರತಿ ದಿನ 400 ಕ್ಯೂಸೆಕ್ಸ್ (ಸುಮಾರು 0.518 ಟಿಎಂಸಿ) ನೀರನ್ನು ಕಾಲುವೆಗೆ ಹರಿಸಲು ಸೂಚಿಸಲಾಗಿದೆ. ಈ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಬೇಕೆಂದು ಸ್ಪಷ್ಟವಾಗಿ ನಿರ್ದೇಶಿಸಲಾಗಿದೆ.
ಇದೇ ವೇಳೆ, ಬಿಡುಗಡೆಗೊಳ್ಳುವ ನೀರು ವ್ಯರ್ಥವಾಗದಂತೆ ಹಾಗೂ ಗುರುತಿಸಲ್ಪಟ್ಟ ಸ್ಥಳಗಳಿಗೆ ಸಮರ್ಪಕವಾಗಿ ನೀರು ತಲುಪುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ವಹಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.
ಈ ಕ್ರಮದಿಂದ ಬಳ್ಳಾರಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಗಲಿದೆ ಎಂದು ಅವರು ಆದೇಶದಲ್ಲಿ ಉಲ್ಲೇಖ ಮಾಡಿದ್ದಾರೆ.





