ಬೆಳಗಾಯಿತು ವಾರ್ತೆ | www.belagayithu.in
ಹಾವೇರಿ, ಮಾರ್ಚ್ 11: ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ ಕಾರಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಕಳೆದ ವಾರ ಪ್ರತಿ ಕ್ವಿಂಟಾಲ್ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.