ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಬಂಧಿಸಲಾಗಿದೆ.
ಮಾಜಿ ಸಚಿವ್ ನಾಗೇಂದ್ರ ಅವರ ಪರವಾಗಿ ಹರೀಶ್ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್ ಪಡೆದುಕೊಂಡಿದ್ದಾರೆ. ಅಲ್ಲದೆ, 50ರಿಂದ 60 ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್ನನ್ನು ಬಂಧಿಸಿದ್ದಾರೆ.
ಇದೀಗ ಜಾರಿ ನಿರ್ದೇಶನಾಲಯ ಏಕಾಏಕಿ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ.





