ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಗುಂಡಾ ರಾಜಕೀಯ ಸಂಸ್ಕೃತಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ಪಾಲಿಕೆ ಸದಸ್ಯ ಕುಬೇರ ಅವರ ಬಂಧನಕ್ಕೆ ಆಗ್ರಹಿಸಿ ನಡೆದ ಧರಣಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ಈ ಹಿಂದೆ ನಗರದಲ್ಲಿ ಶಾಸಕ ಭರತ್ ರೆಡ್ಡಿ ಅವರಿಂದ ಗುಂಡಾಗಿರಿ ನಡೆದಿದ್ದು, ಈಗ ಪಾಲಿಕೆ ಸದಸ್ಯರಿಂದಲೂ ಅದೇ ರೀತಿಯ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ” ಎಂದು ಹೇಳಿದರು.
ಶುಕ್ರವಾರ ನಡೆದ ಈ ಘಟನೆ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಹಾಗಾಗಿ ತಪಿತಸ್ಥ ಕುಬೇರ ಅವರನ್ನು ತಕ್ಷಣ ಬಂಧಿಸಬೇಕು. ಹಲ್ಲೆಗೆ ಒಳಗಾದ ವೀರೇಶ ಅವರಿಗೆ ನ್ಯಾಯ ಒದಗಿಸಬೇಕು ಎಂದ ಅವರು, ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಗುಂಡಾವರ್ತನೆ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ ಎಂದು ಅವರು ಕಿಡಿಕಾರಿದರು.
ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಸೋಮಶೇಖರ್ ರೆಡ್ಡಿ, ಜನರಲ್ಲಿ ಭದ್ರತೆ ಭಾವನೆ ಮೂಡಿಸಲು ಸರ್ಕಾರ ವಿಫಲವಾಗುತ್ತಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಬಿಜೆಪಿಯ ಸದಸ್ಯರು, ಪೌರ ಕಾರ್ಮಿಕರು, ಸಿಬ್ಬಂದಿಗಳು ಹಾಜರಿದ್ದರು.





