ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಜಿಲ್ಲೆಯಲ್ಲಿನ ಸರ್ಕಾರಿ ಜಮೀನುಗಳ ಮೇಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದ್ದು, ನಗರ ಹೊರವಲಯದ ಬಂಡಿಹಟ್ಟಿ ಪ್ರದೇಶದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಬಂಡಿಹಟ್ಟಿ ವ್ಯಾಪ್ತಿಯ ರೆಡ್ಡಿ ಕಾಂಪೌಂಡ್ನಲ್ಲಿ ಇರುವ ಸರ್ವೇ ನಂಬರ್ 318ರಲ್ಲಿನ ಸುಮಾರು 3.13 ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಭೂಮಿ ಕೋಟ್ಯಾಂತರ ರೂಪಾಯಿ ಮೌಲ್ಯ ಹೊಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಕ್ಷಣವೇ ಕಾರ್ಯಾಚರಣೆ ನಡೆಸಿ, ಒತ್ತುವರಿಯನ್ನು ತೆರವುಗೊಳಿಸಿ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝಬೇರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಸುಮಾರು ಎರಡು ಎಕರೆ ಭೂಮಿಯನ್ನು ತಕ್ಷಣವೇ ತೆರವುಗೊಳಿಸಿ ಸರ್ಕಾರದ ವಶಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಒತ್ತುವರಿಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





