ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ತಾಲೂಕಿನ ಸಂಜೀವರಾಯನ ಕೋಟೆ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿ ಮಾಡಿದ್ದು, ಸುಮಾರು 20ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿದೆ ಎಂದು ಕುರಿ ಮಾಲಿಕ ಸಣ್ಣ ತಿಮ್ಮಪ್ಪ ಅವರು ತಿಳಿಸಿದ್ದಾರೆ.
ಶನಿವಾರ ತಡರಾತ್ರಿ 2ಗಂಟೆ ಸುಮಾರಿಗೆ ಚಿರತೆ ದಾಳಿ ಮಾಡಿದೆ. ಇದರಿಂದ ಗಾಯಗೊಂಡ 20ಕುರಿಗಳು ಸಾವನಪ್ಪಿದೆ. ಕಳೆದ ಮೂರು ತಿಂಗಳ ಹಿಂದೆಯೂ ಇದೆ ರೀತಿ ದಾಳಿ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೋನ್ ಗಳನ್ನು ಇಡಲಾಗಿತ್ತು. ಆದರೆ ಚಿರತೆ ಸೇರೆ ಆಗಿಲ್ಲ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಪ್ರತಿ ಬಾರಿ ಈ ರೀತಿ ಚಿರತೆ ಕಾಣಿಸಿಕೊಳ್ಳುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ರಾತ್ರಿ ಸಮಯದಲ್ಲಿ ರೈತರು ತಮ್ಮ ಹೊಲಗಳಿಗೆ ತೆರಳಲು ಭಯ ಭೀತರಾಗಿದ್ದಾರೆ. ಹಾಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಇದಕ್ಕೆ ಶಾಸ್ವತ ಪರಿಹಾರವನ್ನು ನೀಡಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನೂ ಚಿರತೆ ದಾಳಿ ಮಾಡಿದ ವಿಷಯ ತಿಳಿದ ಅಧಿಕಾರಿಗಳು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಪ್ರರಿಶೀಲನೆ ಮಾಡಿದ್ದಾರೆ. ಜೊತೆಗೆ ಪರಿಹಾರ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ ಎಂದು ಕುರಿಗಳ ಮಾಲೀಕ ತಿಮ್ಮಪ್ಪ ಅವರು ಹೇಳಿದ್ದಾರೆ.