ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ‘ನಮ್ಮ ಜಿಲ್ಲೆಯಲ್ಲಿ ಸಂಗ್ರಹವಾದ ‘ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್)’ದ ಹಣ ಬಳಸಿಕೊಳ್ಳಲು ನಮಗೇ ಆಗುತ್ತಿಲ್ಲ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂಥ ಅನ್ಯಾಯವಾಗಿದ್ದಿದ್ದರೆ ಇಷ್ಟು ಹೊತ್ತಿಗೆ ಪರಿಸ್ಥಿತಿಯೇ ಭಿನ್ನವಾಗಿರುತ್ತಿತ್ತು. ಬಳ್ಳಾರಿ ವಿಷಯದಲ್ಲಿ ಮಲತಾಯಿ ಧೋರಣೆ ಪ್ರದರ್ಶಿಸಲಾಗುತ್ತಿದೆ’ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
‘ಬಳ್ಳಾರಿ ನಗರ ಭಾಗಶಃ ಕೊಳೆಗೇರಿಗಳಿಂದ ಆವೃತ್ತವಾಗಿದೆ. ಅಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡದ ಕುಟುಂಬಗಳ ಮೇಲೆ ಹೆಚ್ಚಿನ ಬಡ್ಡಿ ಹಾಕಲಾಗುತ್ತಿದೆ. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಹೀಗಾಗಿ ಜನ ಕತ್ತಲಲ್ಲಿ ಮಲಗುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ. ಸರ್ಕಾರ ವಿದ್ಯುತ್ ಬಿಲ್ಗಳ ಮೇಲಿನ ಬಡ್ಡಿ ಮನ್ನಾ ಮಾಡಿದರೆ ಜನ ಅಸಲು ಪಾವತಿಸಲು ಸಿದ್ಧರಿದ್ದಾರೆ. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು. ಒಂದು ಅಭಿಯಾನ ಮಾಡಿ ಆರು ತಿಂಗಳು ಸಮಯ ನೀಡಿದರೆ ಜನ ಬಿಲ್ ಪಾವತಿ ಮಾಡಲಿದ್ದಾರೆ. ಬಡಜನರಿಗೆ ತೊಂದರೆ ಕೊಡಬಾರದು’ ಎಂದು ಮನವಿ ಮಾಡಿದರು.





