ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ದೇಶದ ಅಭಿವೃದ್ಧಿ ಹಾಗೂ ಜನರ ಸುಭಿಕ್ಷೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಳ್ಳುವ ಪ್ರತಿಯೊಂದು ತೀರ್ಮಾನವೂ ಜನಪರವಾಗಿರುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ತಿಳಿಸಿದ್ದಾರೆ.
ಈ ಕುರಿತು ಮಾನಾಡಿದ ಅವರು, ದೇಶದ ಜನರ ಹಾಗೂ ರಾಷ್ಟ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ಮೋದಿ ಅವರ ಚಿನ್ನ ಖರೀದಿ ಕುರಿತ ಮನವಿಯನ್ನು ಕಾಂಗ್ರೆಸ್ ಪಕ್ಷದವರು ರಾಜಕೀಯ ಉದ್ದೇಶದಿಂದ ಟೀಕಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರ ದೇಶದ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದಲೇ ಇರುತ್ತದೆ. ಆದ್ದರಿಂದ ಅವರ ಮನವಿಯನ್ನು ಎಲ್ಲರೂ ಸ್ವಾಗತಿಸಿ ಗೌರವಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಈ ಹಿಂದೆ 1967ರಲ್ಲಿ ಮಾಜಿ ಪ್ರಧಾನಿ ಇಂದ್ರಾ ಗಾಂಧಿ ಅವರು ಕೂಡ “ಚಿನ್ನ ಖರೀದಿಯನ್ನು ಕಡಿಮೆ ಮಾಡಿ, ರಾಷ್ಟ್ರೀಯ ಶಿಸ್ತು ಪಾಲಿಸಿ” ಎಂದು ಜನರಿಗೆ ಮನವಿ ಮಾಡಿದ್ದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ತಾಯಣ್ಣ ಹೇಳಿದರು.
ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡಬೇಕು. ಒಂದು ವರ್ಷದವರೆಗೆ ಚಿನ್ನ ಖರೀದಿಯನ್ನು ಕಡಿಮೆ ಮಾಡಬೇಕು. ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು ತಗ್ಗಿಸಿ, ಮೆಟ್ರೋ ಹಾಗೂ ಸಾರ್ವಜನಿಕ ಸಾರಿಗೆ ಬಳಸಬೇಕು. ಅಡುಗೆ ಎಣ್ಣೆ ಬಳಕೆಯನ್ನು ಕಡಿಮೆ ಮಾಡಿ, ರಾಸಾಯನಿಕ ರಸಗೊಬ್ಬರಗಳ ಅವಲಂಬನೆಯನ್ನು ತಗ್ಗಿಸಿ, ನೈಸರ್ಗಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ವಿದೇಶಿ ಬ್ರ್ಯಾಂಡ್ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ, ಸ್ವದೇಶಿ ವಸ್ತುಗಳಿಗೆ ಆದ್ಯತೆ ನೀಡಬೇಕು. ಕನಿಷ್ಠ ಒಂದು ವರ್ಷ ವಿದೇಶಿ ಪ್ರವಾಸಗಳನ್ನು ತಪ್ಪಿಸಬೇಕು ಎಂಬ ಪ್ರಧಾನಿ ಅವರ ಕೋರಿಕೆಯನ್ನು ದೇಶದ ಹಿತದೃಷ್ಟಿಯಿಂದ ಎಲ್ಲರೂ ಪಾಲಿಸಬೇಕು ಎಂದು ಮೀನಳ್ಳಿ ತಾಯಣ್ಣ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ರಾಜಕೀಯ ಪ್ರೇರಿತ ಹೇಳಿಕೆಗಳಿಗೆ ಜನರು ಕಿವಿಗೊಡಬಾರದು ಎಂದು ಅವರು ಹೇಳಿದರು.





