ಬೆಳಗಾಯಿತು ವಾರ್ತೆ
ಬಳ್ಳಾರಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಹಾಗೂ ಗೋವಿನ ರಕ್ಷಣೆಗೆ ಸರ್ಕಾರಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದುಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಪಾದಯಾತ್ರೆ ನಡೆಸಿ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ನಗರದ ರಾಘವ ಕಲಾಮಂದಿರದ ಬಳಿ ಸೇರಿದ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗೋ ರಕ್ಷಣೆಗೆ ಘೋಷಣೆಗಳನ್ನು ಕೂಗುತ್ತ ಹೊಸ ಜಿಲ್ಲಾಡಳಿತ ಭವನದಲ್ಲಿರುವ ತಹಸೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಹಿಂದೂ ಧರ್ಮದಲ್ಲಿ ಹಸುವನ್ನು ದೇವರೆಂದು ಪೂಜಿಸಲಾಗುತ್ತದೆ. ಆದರೂ ಹಲವೆಡೆ ಗೋಹತ್ಯೆ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಗೋ ರಕ್ಷಣೆಗೆ ಇರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಜೊತೆಗೆ ಅಕ್ರಮ ಗೋ ಸಾಗಣೆ ಹಾಗೂ ಗೋಹತ್ಯೆ ತಡೆಯಲು ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಗೋ ಸಂರಕ್ಷಣೆ ಕೇವಲ ಧಾರ್ಮಿಕ ಭಾವನೆಗೆ ಸೀಮಿತವಲ್ಲ; ಅದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ವಿಷಯವಾಗಿದೆ. ಗೋಹತ್ಯೆ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಯ್ಡು, ಹೆಚ್. ಹನುಮಂತಪ್ಪ, ಕೆ.ಎಸ್. ದಿವಾಕರ್, ಕೆ.ಎಸ್. ಅಶೋಕ್ ಕುಮಾರ್, ಗಣಪಾಲ ಐನಾಥರೆಡ್ಡಿ ಸೇರಿದಂತೆ ಹಿಂದುಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




