ಬೆಳಗಾಯಿತು ವಾರ್ತೆ |www.belagayithu.in
ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ. ಈ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಮತದಾನವನ್ನು ನಡೆಸುವುದನ್ನು ಸೂಚಿಸುತ್ತದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.
ಭಾರತದಲ್ಲಿ, ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ಅದು ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ.
ಕೋವಿಂದ್ ನೇತೃತ್ವದ ಸಮಿತಿಯ ಇತರ ಸದಸ್ಯರು – ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಆಗಿದ್ದಾರೆ.
ವರದಿಯು 18,626 ಪುಟಗಳನ್ನು ಹೊಂದಿದೆ. 191 ದಿನಗಳ ಕಾಲ ತಜ್ಞರು, ಸಂಶೋಧನಾಕಾರರ ನಡುವೆ ಸಮಾಲೋಚನೆ ನಡೆಸಿ ಸಿದ್ಧಪಡಿಸಲಾಗಿದೆ. 15 ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಪ್ರಾಚಿ ಮಿಶ್ರಾ ಅವರ ಏಕಕಾಲಿಕ ಚುನಾವಣೆಗಳ ಆರ್ಥಿಕ ಕಾರ್ಯಸಾಧ್ಯತೆಯ ಕುರಿತಾದ ವಿಚಾರವನ್ನು ವರದಿ ಒಳಗೊಂಡಿದೆ.