ಬೆಳಗಾಯಿತು ವಾರ್ತೆ
ಬಳ್ಳಾರಿ: ಜನಸೇನಾ ಪಕ್ಷದ ಮುಖ್ಯಸ್ಥ ಕೊಣಿದಲ ಪವನ್ ಕಲ್ಯಾಣ ಅವರ ಹುಟ್ಟುಹಬ್ಬದ ಅಂಗವಾಗಿ ‘ಒಂದು ದಿನದ ಸಂಭ್ರಮವಲ್ಲ, 365 ದಿನಗಳ ಜನಸೇವೆಯೇ ನಮ್ಮ ಸಂಕಲ್ಪ’ ಎಂಬ ಧ್ಯೇಯದೊಂದಿಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಬಳ್ಳಾರಿ ಸಾಧಕ ರವಿ ಭಾರತೀಯ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಗಳನ್ನು ಒಗ್ಗೂಡಿಸುವ ಚಿಂತನಾ ವಿಧಾನ, ಧರ್ಮಗಳ ಪ್ರಸ್ತಾಪವಿಲ್ಲದ ರಾಜಕೀಯ, ಎಲ್ಲ ಭಾಷೆಗಳ ಗೌರವ, ಸಂಸ್ಕೃತಿಗಳ ಸಂರಕ್ಷಣೆ, ಪ್ರಾದೇಶಿಕತೆಯನ್ನು ಮರೆಯದ ರಾಷ್ಟ್ರೀಯತೆ, ಭ್ರಷ್ಟಾಚಾರದ ವಿರುದ್ಧ ರಾಜಿಯಿಲ್ಲದ ಹೋರಾಟ ಹಾಗೂ ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿ ಸೇರಿದಂತೆ ಏಳು ಮೂಲ ಸಿದ್ಧಾಂತಗಳನ್ನು ಜನಸೇನಾ ಪಕ್ಷ ಹೊಂದಿದೆ ಎಂದರು.
ಪವನ್ ಕಲ್ಯಾಣ ಅವರ ಹುಟ್ಟುಹಬ್ಬದ ಅಂಗವಾಗಿ ಜನಸೇವಾ ಕೇಂದ್ರ ಉದ್ಘಾಟನೆ, ಉಚಿತ ಕಣ್ಣಿನ ತಪಾಸಣೆ ಹಾಗೂ ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆ, ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು. ಹೃದಯ, ಕ್ಯಾನ್ಸರ್, ನರ, ಮೂತ್ರಪಿಂಡ, ಮೂಳೆ ಮತ್ತು ಕೀಲು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಪಾಸಣೆ ಹಾಗೂ ಚಿಕಿತ್ಸಾ ಸೇವೆಗಳನ್ನು ಒದಗಿಸುವ ಉದ್ದೇಶವಿದೆ ಎಂದು ಹೇಳಿದರು.
ಕಾರ್ಯಕ್ರಮಗಳ ಉದ್ಘಾಟನೆಯ ಅಂಗವಾಗಿ ಸೆಪ್ಟೆಂಬರ್ 2ರಂದು ಬಳ್ಳಾರಿಯ ದುರ್ಗಮ್ಮ ದೇವಸ್ಥಾನ ಸಮೀಪದಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಮನವಿ ಮಾಡಿದರು.
ಹೊಸ ಕೆಎಸ್ಆರ್ಡಿಪಿ ಬಸ್ ನಿಲ್ದಾಣದ ಬಳಿಯ ಸರ್.ಎಂ. ವಿಶ್ವೇಶ್ವರಯ್ಯ ಲಾರಿ ಟರ್ಮಿನಲ್ ಆವರಣದಲ್ಲಿ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಜನಸೇವಾ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ದಿನಗಳಲ್ಲಿ ಬಳ್ಳಾರಿಯಲ್ಲಿ ಪಕ್ಷದ ಉದ್ಘಾಟನೆ, ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಜಿಲ್ಲಾ ಕಚೇರಿ ಉದ್ಘಾಟನೆ ನಡೆಯಲಿದೆ ಎಂದು ರವಿ ಭಾರತೀಯ ತಿಳಿಸಿದರು.
‘ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ’ ಎಂಬ ಆಶಯದೊಂದಿಗೆ ಪಕ್ಷವು ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದೆ. ವೈದ್ಯಕೀಯ ಸೇವೆ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತರು 9606058266 ಸಂಖ್ಯೆಗೆ ಸಂಪರ್ಕಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ವೆಂಕಟೇಶ್, ತಿಪ್ಪೇಸ್ವಾಮಿ, ರಾಘವೇಂದ್ರ, ಪದ್ಮಾವತಿ, ಶಾಂತಿ, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





