ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಎ.ಐ.ಡಿ.ವೈ.ಓ ಯುವಜನ ಸಂಘಟನೆ ನೇತೃತ್ವದಲ್ಲಿ ಸಂಗೀತ, ಚಿತ್ರಕಲಾ, ರಂಗ ಕಲಾ ಮತ್ತು ದೈಹಿಕ ಶಿಕ್ಷಕರನ್ನು ನೇಮಕಾತಿಗೆ ಆಗ್ರಹಿಸಿ ಚಿತ್ರ ಬಿಡಿಸುವ ಮತ್ತು ಹೋರಾಟದ ಹಾಡು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಯಿತು.
ರಾಜ್ಯಾಧ್ಯಕ್ಷರಾದ ಶರಣಪ್ಪ ಉದ್ಘಾಳ್ ರವರು ಮಾತನಾಡಿ ‘ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನೇದಿನೇ ಹೆಚ್ಚುತ್ತಲೇ ಇದೆ.ಆಡಳಿತಾರೂಢ ಸರ್ಕಾರಗಳು ಯಾವುದೇ ಔದ್ಯೋಗಿಕ ನೀತಿಗಳನ್ನು ಜಾರಿಗೆ ತರದಿ ತರದಿರುವುದು ವಿಪಯ್ಯಾಸದ ಸಂಗತಿಯಾಗಿದೆ. ಮುಖ್ಯವಾಗಿ ಪ್ರತೀ ವರ್ಷ ಕೋಟ್ಯಾಂತರ ಯುವಕರು ಈ ನಿರುದ್ಯೋಗದ ಪಡೆಗೆ ಸೇರಿಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಸಂಗೀತ, ಚಿತ್ರಕಲೆ, ನೃತ್ಯ ಮತ್ತು ನಾಟಕ ವಿಷಯಗಳಲ್ಲಿ ಪದವಿಗಳನ್ನು ಪಡೆದವರೂ ಇದ್ದಾರೆ. ಇವರು ಅತ್ಯಂತ ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾದವರಾಗಿದ್ದಾರೆ. ನಿರುದ್ಯೋಗದ ಬೇಗೆಯಲ್ಲಿ ಬೇಯುತ್ತಿದ್ದಾರೆ. ಇನ್ನೊಂದೆಡೆ ಸರ್ಕಾರ ಖಾಯಂ ಹುದ್ದೆಗಳನ್ನು ಭರ್ತಿ ಮಾಡದೆ ಗುತ್ತಿಗೆ ಆಧಾರದಲ್ಲಿ ಅಥವಾ ಅತಿಥಿಗಳ ರೂಪದಲ್ಲಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ಇವರಿಗೆ ಸಿಗುವ ಸಂಬಳವೂ ಕಡಿಮೆ. ಈ ಕನಿಷ್ಠ ವೇತನದಲ್ಲಿ ಇಂದಿನ ದುಬಾರಿ ಬೆಲೆ ಏರಿಕೆಯ ಬಿಸಿಗೆ ಗೌರವಯುತ ಜೀವನ ನಡೆಸುವುದು ದುಸ್ತರವಾಗಿದೆ. ಇದರಿಂದ ಅವರು ಮಾನಸಿಕ ಜರ್ಜರಿತರಾಗುತ್ತಿದ್ದಾರೆ. ಆದ್ದರಿಂದ ಈ ಎಲ್ಲಾ ಶಿಕ್ಷಕರನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಬೇಕೆಂದು ಎಐಡಿವೈಓ ಒತ್ತಾಯಿಸುತ್ತದೆ ಎಂದರು.
ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು, ಕಾರ್ಯದರ್ಶಿಗಳಾದ ಜಗದೀಶ್ ನೇಮಕಲ್ ರವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು, ಸದಸ್ಯರಾದ ನಿಂಗರಾಜು, ಚಿತ್ರಕಲಾ, ಸಂಗೀತ ಮತ್ತು ರಂಗಕಲಾ ಶಿಕ್ಷಕರುಗಳಾದ ಡಿ.ಜಿ.ತಿರುಮಲ, ಗೊವಿಂದಪ್ಪ, ಆರ್.ಪಿ.ಮಂಜುನಾಥ್.ಬಿ.ಜಿ.ದಿನ್ನೆ, ಅಂಬಣ್ಣ ನಾಯಕ, ಚಂದ್ರು ಬಸಾಪುರ, ಮಲ್ಲಿಕಾರ್ಜುನ, ಹೇಮೇಶ್ವರ್, ಹುಲಿಯಪ್ಪ, ವಿಷ್ಣು ಹಡಪದ, ಎಂ.ನರೇಂದ್ರ, ಶಿವರಾಜ, ಬಸವರಾಜ್ ಮತ್ತಿತರರು ಹಾಜರಿದ್ದರು.