ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ:ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಂಡೂರು ಪದರ ಶಿಲೆಯ ಪಟ್ಟಿಯ ದಟ್ಟ ಎಲೆಯುದುರುವ ಕಾಡಿನ 1,೦೦೦ ಚ.ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಪ್ರಾಗೈತಿಹಾಸಿಕ ನೆಲೆಗಳನ್ನು ಹುಡುಕುವುದು ಒಂದು ದೊಡ್ಡ ಸವಾಲಾಗಿದ್ದು, ಸಂಡೂರು ಬೆಟ್ಟಗಳಲ್ಲಿರುವ ನವಲೂಟಿ ಗುಹೆಯಲ್ಲಿ ಒಂದು ಶೋಧನೆಯಲ್ಲಿ ದೊರೆತ ಶಿಲಾಯುಗದ ಮಾನವನ ಕುರುಹುಗಳಾದ ಸೂಕ್ಷö್ಮಶಿಲಾ ಆಯುಧಗಳು ಬಹುಶಃ 1೦ ಸಾವಿರ ವರ್ಷಗಳ ಹಿಂದೆ ಜೀವನಾಧಾರಕ್ಕೆ ಬೇಕಾದ ಸಂಪನ್ಮೂಲಗಳ ಹುಡುಕಾಟದಲ್ಲಿ ಶಿಲಾಯುಗದ ಮಾನವ ಬಂದಾಗಿನ ಕಾಲದ್ದಾಗಿರಬಹುದು ಎಂದು ಗುರುತಿಸಲಾಗಿದೆ.
ಬಳ್ಳಾರಿ ಹೆರಿಟೇಜ್ ಟ್ರಸ್ಟ್ ಹಾಗೂ ಬಳ್ಳಾರಿಯ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪ್ರಾಗೈತಿಹಾಸ ವಸ್ತು ಸಂಗ್ರಹಾಲಯದ ಸದಸ್ಯರು ಮತ್ತು ಖ್ಯಾತ ಪ್ರಾಗೈತಿಹಾಸ ತಜ್ಞರಾದ ಡಾ.ರವಿ ಕೋರಿಶೆಟ್ಟರ್, ಡಾ.ಸಮದ್ ಕೊಟ್ಟೂರು ಇವರ ಮಾರ್ಗದರ್ಶನದಲ್ಲಿ ಕಳೆದ ಜೂನ್ ಕೊನೆಯ ವಾರದಲ್ಲಿ ಶೋಧಯಾನ ಕೈಗೊಂಡು ನವಲೂಟಿಯ ಗುಹೆಗೆ ಭೇಟಿ ನೀಡಿದ್ದರು.
ಈ ತಂಡದಲ್ಲಿ ಸಂತೋಷ್ ಮಾರ್ಟಿನ್, ಅಹಿರಾಜ್.ಎಂ ಹಾಗೂ ಕೆಲವು ಪ್ರಾಗೈತಿಹಾಸದ ವಿದ್ಯಾರ್ಥಿಗಳೂ ಭಾಗವಹಿಸಿದ್ದರು. ಈ ತಂಡಕ್ಕೆ ಶಿಲಾಯುಗದಲ್ಲಿ ನವಲೂಟಿ ಗುಹೆಯಲ್ಲಿ ಮಾನವ ನೆಲೆಸಿದ್ದ ಎಂಬುದಕ್ಕೆ ಅದ್ಭುತವಾದ ಪುರಾವೆಗಳು ದೊರಕಿವೆ ಎಂದು ಅವರು ಹೇಳಿದ್ದಾರೆ.





