ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಪಡಿತರ ಅಕ್ಕಿ ಸಾಗಾಣಿಕೆ ವಾಹನವನ್ನು ತಡೆದು ಹಣ ಸುಲಿಗೆ ಮಾಡಿದ ಆರೋಪದಲ್ಲಿ ಮೋಕಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ದಿನಾಂಕ 28.04.2026 ರಂದು ರಾತ್ರಿ 3.30 ರಿಂದ 5.30ರ ಅವಧಿಯಲ್ಲಿ ಶರಬಯ್ಯ ಎಂಬುವವರಿಗೆ ಸೇರಿದ ಪಡಿತರ ಅಕ್ಕಿ ಸಾಗಾಣಿಕೆ ವಾಹನವನ್ನು ಮೋಕಾ ಪಾರೆಸ್ಟ್ ಬಳಿ ತಡೆದು ನಿಲ್ಲಿಸಿದ ದೇವರಾಜ್ ಎ.ಪಿ.ಸಿ. 87 ಹಾಗೂ ಸಾಯಿ ರಾಮ್ ಎಂಬುವವರು, ಬೆದರಿಕೆ ಹಾಕಿ 5 ಲಕ್ಷ ರೂ. ಬೇಡಿಕೆ ಇಟ್ಟು, 3 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಕುರಿತು ದಿನಾಂಕ 06.05.2026 ರಂದು ಮೋಕಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 53/2026 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ದಿನಾಂಕ 07.05.2026 ರಂದು ಆರೋಪಿತರಾದ ದೇವರಾಜ್ ಎ.ಪಿ.ಸಿ. 87 ಹಾಗೂ ಸಾಯಿ ರಾಮ್ ಅವರನ್ನು ಬಂಧಿಸಲಾಗಿದ್ದು, ಅವರಿಂದ ಸುಲಿಗೆ ಮಾಡಲಾದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ದೇವರಾಜ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗನ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಎಸ್ಪಿ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತಿದ್ದು, ಪ್ರಕರಣದ ಇತರೆ ಆರೋಪಿತರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪನ್ನೇಕರ್ ತಿಳಿಸಿದ್ದಾರೆ.





