ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು ‘ಸಮಾಧಾನ ಸಮಾರೋಹ್’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ಕೆಎಎಲ್ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ಹೇಳಿದರು.
‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್ ಕುರಿತು, ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನ ಮೊದಲ ಮಹಡಿಯಲ್ಲಿರುವ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕೆ ಇದು ವಿಶೇಷ ಲೋಕ್ ಅದಾಲತ್ ಆಗಿದೆ. ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ದಾವೆಗಳನ್ನು ಪರಸ್ಪರ ಒಪ್ಪಿಗೆ ಮತ್ತು ಸಂಧಾನದ ಮೂಲಕ ಬಗೆಹರಿಸಿ, ದಾವೆದಾರರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಮಾತನಾಡಿ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಸಾವಿರಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ‘ವಿಶೇಷ ಲೋಕ್ ಅದಾಲತ್’ ಎಂಬ ವಿನೂತನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಎಂದೂ ನಡೆಯದ ಈ ವಿಶೇಷ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ಸುಲಭವಾಗಿ ಮುಕ್ತಾಯಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.





