ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಹಿಂದೂಪುರ ಕ್ಷೇತ್ರದ ಶಾಸಕ ನಂದಮೂರಿ ಬಾಲಕೃಷ್ಣ ಅವರು ಚಿತ್ರೀಕರಣದ ವೇಳೆ ಗಾಯಗೊಂಡ ಹಿನ್ನೆಲೆಯಲ್ಲಿ, ಅವರ ಶೀಘ್ರ ಗುಣಮುಖಕ್ಕಾಗಿ ನಗರದ ಆದಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.
ಪೂಜೆ ಬಳಿಕ ಮಾತನಾಡಿದ ನಂದಮೂರಿ ಅಭಿಮಾನಿ ಎಲ್. ಮಲ್ಲಿಕಾರ್ಜುನ, “ನಂದಮೂರಿ ಬಾಲಕೃಷ್ಣ ಅವರು ಚಿತ್ರರಂಗದ ಜೊತೆಗೆ ರಾಜಕೀಯ ಮತ್ತು ಸಮಾಜಸೇವೆಯಲ್ಲೂ ಸಕ್ರಿಯರಾಗಿದ್ದಾರೆ. ಬಸವತಾರಕಂ ಕ್ಯಾನ್ಸರ್ ಆಸ್ಪತ್ರೆಯ ಮೂಲಕ ಸಾವಿರಾರು ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಮೂಲಕ ಮಾನವೀಯ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯರಾಗಲಿ ಎಂಬ ಉದ್ದೇಶದಿಂದ ವಿಶೇಷ ಪೂಜೆ ಆಯೋಜಿಸಲಾಗಿದೆ” ಎಂದು ತಿಳಿಸಿದರು.
ಜುಲೈ 21ರಂದು ಕಾಕಿನಾಡ ಬಂದರು ಪ್ರದೇಶದಲ್ಲಿ ಅವರ 111ನೇ ಚಿತ್ರದ ಆ್ಯಕ್ಷನ್ ದೃಶ್ಯದ ಚಿತ್ರೀಕರಣ ವೇಳೆ ಸಂಭವಿಸಿದ ಅವಘಡದಲ್ಲಿ ಎಡ ಕಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಭಕ್ತರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅವರು ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಸಂಕಲ್ಪ ಮಾಡಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಕೆ.ವಿ. ಸತ್ಯನಾರಾಯಣ ಸ್ವಾಮಿ, ಹುಳುಗಪ್ಪ, ರಾಜ, ಹೊನ್ನೂರಪ್ಪ, ಶೇಖರ್ ಸೇರಿದಂತೆ ಹಲವಾರು ಅಭಿಮಾನಿಗಳು ಮತ್ತು ಭಕ್ತರು ಭಾಗವಹಿಸಿ ಬಾಲಕೃಷ್ಣ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.





