ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವನ್ನು ತೀವ್ರವಾಗಿ ಟೀಕಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, “ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಸರ್ಕಾರದ ಸಾಧನೆ” ಎಂದು ವಾಗ್ದಾಳಿ ನಡೆಸಿದರು.
ನಗರದ ರಾಮುಲು ಅವರ ಗೃಹ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಸರ್ಕಾದ ಸಾಧನೆ ಬಗ್ಗೆ ಕಿಡಿ ಕಾರಿದರು.
, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಸುಳ್ಳಿನ ಮಾಲೀಕ” ಎಂದು ಟೀಕಿಸಿದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು “ಸುಳ್ಳಿನ ಸಾಕ್ಷಿದಾರ” ಎಂದು ಆರೋಪಿಸಿದರು. ಕಾಂಗ್ರೆಸ್ “ಸುಳ್ಳಿನ ಮೇಲೆಯೇ ಸರ್ಕಾರ ನಡೆಯುತ್ತಿದೆ”.
ರಾಜ್ಯದಲ್ಲಿ ರೈತರ ಸಮಸ್ಯೆಗಳು ಹೆಚ್ಚಾಗಿದ್ದು, ಹಾಲು ಉತ್ಪಾದಕರಿಗೆ ಬಾಕಿ ಹಣ ನೀಡಲಾಗಿಲ್ಲ, ಬೀಜ ಬಿತ್ತನೆ ದರ ಏರಿಕೆಯಾಗಿದೆ ಹಾಗೂ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಆರೋಪಿಸಿದರು.
“ಇದು ಮಾನಗೆಟ್ಟ ಸರ್ಕಾರ” ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರ ನೀಡುವ ರಸಗೊಬ್ಬರಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಜೊತೆಗೆ, ಕಿಸಾನ್ ಸನ್ಮಾನ್ ಯೋಜನೆಯನ್ನು ನಿಲ್ಲಿಸಲಾಗಿದೆ.
ನೀರು, ವಿದ್ಯುತ್, ಲ್ಯಾಂಡ್ ರಿಜಿಸ್ಟ್ರೇಷನ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ಮೋಸಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರ ವಿಫಲವಾಗಿದೆ. ವೇತನ ಹೆಚ್ಚಳ ಮಾಡಿಲ್ಲ, ಹಳೆಯ ಬಸ್ಗಳ ನಿರ್ವಹಣೆಯಲ್ಲೂ ನಿರ್ಲಕ್ಷ್ಯ ವಹಿಸಲಾಗಿದೆ.
ಅಂಗನವಾಡಿ ನೌಕರರು ಹಾಗೂ ಸರ್ಕಾರಿ ಸಿಬ್ಬಂದಿಗೆ ಸರಿಯಾಗಿ ಸಂಬಳ ನೀಡಲಾಗುತ್ತಿಲ್ಲ. “ಎಲ್ಲಾ ಇಲಾಖೆಗಳಲ್ಲೂ ಸರ್ಕಾರ ವಿಫಲವಾಗಿದೆ. ಇಂತಹ ಸರ್ಕಾರ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದೆ?” ಎಂದು ಪ್ರಶ್ನಿಸಿದರು.
ಜಾತಿ-ಜಾತಿಗಳ ಮಧ್ಯೆ ಭಿನ್ನತೆ ಸೃಷ್ಟಿಸುವ ಕೆಲಸ ಸರ್ಕಾರ ಮಾಡುತ್ತಿದೆ, ಹಿಜಾಬ್ ವಿಚಾರ ಇನ್ನೂ, ಸುಪ್ರೀಂ ಕೋರ್ಟ್ನಲ್ಲಿ ಇರುವಾಗ ನಿಷೇಧ ವಾಪಸ್ ಪಡೆದಿದ್ದು ಯಾಕೆ?” ಎಂದು ಪ್ರಶ್ನಿಸಿದರು.
ಇದೇ ವೇಳೆ, ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಹಿಂದೂ ಹಬ್ಬಗಳ ಮೇಲೆಯೂ ದಾಳಿ ನಡೆಯುತ್ತಿದೆ. “ಹಿಂದೂ-ಮುಸ್ಲಿಂ ಮಧ್ಯೆ ಜಗಳ ಸೃಷ್ಟಿಸುವ ರಾಜಕಾರಣ ನಡೆಯುತ್ತಿದೆ” ಎಂದ ಅವರು, 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿ, “ಸೂರ್ಯ-ಚಂದ್ರ ಇರುವಷ್ಟು ಸತ್ಯವಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ” ಎಂದು ಹೇಳಿದರು.
ನೀಟ್ ಪರೀಕ್ಷೆ ವಿಚಾರದಲ್ಲಿ ತನಿಖೆ ನಡೆಯುತ್ತಿದ್ದು, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಎಸ್ಸಿ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿತ್ತು ಎಂದು ಹೇಳಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮುಲು, ಪ್ರಧಾನಿ ನರೇಂದ್ರ ಮೋದಿ ಅವರು “ಚಿನ್ನ ಖರೀದಿ ಕಡಿಮೆ ಮಾಡಿ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ” ಎಂದು ಹೇಳಿರುವುದು ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿಯೇ ಎಂದು ಸಮರ್ಥಿಸಿದರು.
“ಭಾರತದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿಲ್ಲ. ಭಾರತ ಅಭಿವೃದ್ಧಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಖರ್ಚು ಕಡಿಮೆ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಆರು-ಎಂಟು ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಅವರು ಮೊದಲು ಸುಧಾರಿಸಿಕೊಳ್ಳಬೇಕು” ಎಂದು ಟೀಕಿಸಿದರು.





