ಬೆಳಗಾಯಿತು ವಾರ್ತೆ/ www.belagayithu.in
ಬಳ್ಳಾರಿ: ರಾಜ್ಯದಲ್ಲಿ ತಮ್ಮ ಸಮುದಾಯದವರೇ ಮುಖ್ಯಮಂತ್ರಿಯಾಗಿದ್ದರೂ ಸಹ ಹಲವು ಅನ್ಯಾಯಗಳನ್ನು ಸಹಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೂ, ಜಿಲ್ಲೆಯಲ್ಲಿ ಜನಸಂಖ್ಯೆ ಹೆಚ್ಚಿದ್ದರೂ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷ ಸ್ಥಾನ, ಮೇಯರ್ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ ಸಮುದಾಯಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಕುರುಬ ಸಮುದಾಯದ ಮುಖಂಡ ಡಾ. ಗಾಂದಿಲಿಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಕುರುಬ ಸಮುದಾಯಕ್ಕೆ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ.
ಹಿಂದೆ ಶಂಭುನಾಥ್ ಸಚಿವರಾಗಿದ್ದ ಬಳಿಕ ಸಮುದಾಯಕ್ಕೆ ಮಂತ್ರಿಮಂಡಲದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಅವರು ನೆನಪಿಸಿದ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಮುಂದಿನ ಸಚಿವ ಸಂಪುಟ ಪುನರ್ರಚನೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇನ್ನೂ, ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕುರುಬ ಸಮುದಾಯವನ್ನು ಕಡೆಗಣಿಸಲಾಗಿದೆ, ಪಕ್ಷಕ್ಕಾಗಿ ದುಡಿದ ಮುಖಂಡರಿಗೆ ರಾಜ್ಯ ಮಟ್ಟದ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು. ಜೊತೆಗೆ ರಾಯಚೂರು ಭಾಗದ ನಾಯಕರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸ್ಥಾನ ಕುರಿತು ಮಾತನಾಡಿದ ಅವರು, ಸಮುದಾಯದ ಸಕ್ರಿಯ ನಾಯಕರೊಬ್ಬರಿಗೆ ಎಂಎಲ್ಸಿ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಣಕಲ್ ಬಸವರಾಜ, ಹೊನ್ಮಪ್ಪ, ಉಮಾಪತಿ, ಸೋಮಪ್ಪ, ಕೆ. ನಾಗರಾಜ್, ಬಿ.ಎಂ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





