ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಗೋಪಾಲಸ್ವಾಮಿ ರಸ್ತೆಯಿಂದ ಮೋಕಾ ರಸ್ತೆಗೆ ಹೋಗುವ ಮಾರ್ಗದಲ್ಲಿ ಸ್ವಚ್ಛತೆ ಸಮಸ್ಯೆ ಉಂಟಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಂತಿ ಸೌಹಾರ್ದ ಸಹಕಾರ ಪತ್ತಿನ ಸಂಘ, ಆನಂದ್ ಎಲೆಕ್ಟ್ರಿಕಲ್ ಹಾಗೂ ಕೆರೆ ಬಸವೇಶ್ವರ ಬ್ಯಾಟರಿ ಅಂಗಡಿ ಎದುರಿನ ಓಪನ್ ಡ್ರೈನೇಜ್ ಎರಡು ವರ್ಷಗಳಿಂದ ಬ್ಲಾಕ್ ಆಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ಡ್ರೈನೇಜ್ ಸಮಸ್ಯೆಯಿಂದಾಗಿ ಆ ಪ್ರದೇಶದಲ್ಲಿ ದುರ್ವಾಸನೆ ಹೆಚ್ಚಾಗಿದ್ದು, ಅಂಗಡಿಗಳಿಗೆ ಬರುವ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವ್ಯಾಪಾರಿಗಳಿಗೆ ಸಹ ಇದರಿಂದ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅಲ್ಲಿನ ವ್ಯಾಪಾರಸ್ಥರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮ ಕೈಗೊಂಡು ಚರಂಡಿ ದುರಸ್ತಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೆ ಎಂಬುದನ್ನು ಕಾದು ನೋಡಬೇಕಾಗಿದೆ.





