ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ:ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ನಿಯಂತ್ರಣ ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನ ಸಾಧನಗಳನ್ನು ಬಳಸಿ ನಿಗಾವಹಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರಸ್ತಕ ವರ್ಷದಿಂದ ಇಲ್ಲಿಯವರೆಗೆ ಸುಮಾರು 300 ರಸ್ತೆ ಅಪಘಾತಗಳು ಸಂಭವಿಸಿದ್ದು, 118 ಜನ ಮೃತಪಟ್ಟಿದ್ದಾರೆ. 436 ಗಂಭೀರ ಸ್ವರೂಪದ ಗಾಯಗಳಾಗಿವೆ. ಹಾಗಾಗಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ನಿಯಂತ್ರಿಸಲು, ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಬಳಕೆ ಮಾಡಲಾಗುವುದು ಎಂದು ತಿಳಿಸಿದರು.
ಸ್ಪೀಡ್ ಲೇಸರ್ ಗನ್
ಸ್ಪೀಡ್ ಲೇಸರ್ ಗನ್ ಉಪಕರಣವು ಸಂಪೂರ್ಣ ಡಿಜಿಟಲ್ ಆಗಿದ್ದು, ಇದರಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಸಂಚಾರಿ ನಿಯಮ ಉಲ್ಲಂಘನೆಯಾದಲ್ಲಿ ಅಂದಿನ ದಿನಾಂಕ, ಪ್ರಿಂಟ್ ದಿನಾಂಕ, ಸೌಂಡ್ ಡೆಸಿಬಲ್ ಮಾಹಿತಿ, ಸ್ಥಳ ಹಾಗೂ ವಾಹನದ ನೋಂದಣಿ ಸಂಖ್ಯೆ ಸೇರಿ ಸ್ವಯಂಚಾಲಿತವಾಗಿ ಈ ಉಪಕರಣವು ರೆಕಾರ್ಡ್ ಮಾಡಿಕೊಳ್ಳುತ್ತದೆ ಎಂದು ಹೇಳಿದರು.





