ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ರಾಜ್ಯ ಸರ್ಕಾರವು ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸ್ಪಷ್ಟಿಪಡಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.